ಹೆಣ್ಣು ಮಕ್ಕಳಿಗೆ ಸಮಾಜದಲ್ಲಿ ಸುರಕ್ಷಿತ ವಾತಾವರಣ ಕಲ್ಪಿಸುವುದು ಪ್ರತಿಯೊಬ್ಬ ನಾಗರಿಕರ ಜವಾಬ್ದಾರಿಯಾಗಿದೆ. ಹೆಣ್ಣು ಮಕ್ಕಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಮೂಲಕ ಅವರುಗಳಿಗೆ ಸಮಾನ ಹಕ್ಕು ನೀಡಿ, ಸಬಲರನ್ನಾಗಿ ಮಾಡಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮನು ಪಟೇಲ್ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ (ಹೆಣ್ಣು ಮಗಳನ್ನು ರಕ್ಷಿಸಿ ಹೆಣ್ಣು ಮಗಳನ್ನು ಓದಿಸಿ) ಯೋಜನೆಯಡಿ, “ಪ್ರಸವಪೂರ್ವ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ”, ಮತ್ತು “ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ -1976” ರ ಕುರಿತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ನಡೆದ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಭಯಮುಕ್ತ ಸುರಕ್ಷಿತ ವಾತಾವರಣ ಕಲ್ಪಿಸುವುದರೊಂದಿಗೆ ಅವರುಗಳನ್ನು ಪುರುಷರಷ್ಟೆ ಸರಿ ಸಮಾನ ರೀತಿಯಲ್ಲಿ ಕಾಣಬೇಕು. ಹೆಣ್ಣು ಮಕ್ಕಳ ಪ್ರಾಮುಖ್ಯತೆಯ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿದಾಗ ಮಾತ್ರ ಲಿಂಗಾನುಪಾತದ ಅಸಮಾನತೆಯನ್ನು ಹೋಗಲಾಡಿಸಲು ಸಾಧ್ಯ ಎಂದರು.
ಕೆಲಸದ ಸ್ಥಳದಲ್ಲಿ ಮಹಿಳೆಯರು ಎದುರಿಸುವ ಲೈಂಗಿಕ ಕಿರುಕುಳಗಳಿಗೆ ಸಂಬಂಧಿಸಿದ ದೂರುಗಳನ್ನು ದಾಖಲಿಸಲು ಆಂತರಿಕ ದೂರು ಸಮಿತಿ ವ್ಯವಸ್ಥೆ ಇದ್ದು, ಇದರ ಪ್ರಯೋಜನವನ್ನು ಮಹಿಳಾ ಉದ್ಯೋಗಿಗಳು ಪಡೆದುಕೊಳ್ಳಬಹುದಾಗಿದೆ ಎಂದ ಅವರು, ಸಮಾಜದಲ್ಲಿ ಅಮಾನವೀಯವಾಗಿ ಕಾಡುತ್ತಿರುವ ಜೀತ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಅಧಿಕಾರಿಗಳು ಕೈಜೋಡಿಸಬೇಕು ಎಂದರು.
ಸರಕಾರದ ಯಾವುದೇ ಕಾಯಿದೆ, ಕಾನೂನು ಹಾಗೂ ಸುತ್ತೋಲೆಗಳನ್ನು ಅನುಷ್ಠಾನ ಮಾಡುವಾಗ, ಅವುಗಳ ರೂಪುರೇಷೆ ಬಗ್ಗೆ ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಸ್ಪಷ್ಟ ಮಾಹಿತಿ ಹೊಂದಿರಬೇಕು. ಈ ನಿಟ್ಟಿನಲ್ಲಿ ಕಾರ್ಯಾಗಾರ ಆಯೋಜಿಸಲಾಗಿದ್ದು, ತರಬೇತಿಯಲ್ಲಿ ಪಡೆದ ಮಾಹಿತಿಯನ್ನು ಅಧಿಕಾರಿಗಳು ತಮ್ಮ ಕ್ಷೇತ್ರಮಟ್ಟದಲ್ಲಿ ಪರಿಣಾಮಕಾರಿ ಅನುಷ್ಠಾನಕ್ಕೆ ಮುಂದಾಗಬೇಕು ಎಂದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಮಹಿಳೆಯರು ಹಾಗೂ ಪುರುಷರು ಸಮಾನರು ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲೂ ಇದ್ದಾಗ ಮಾತ್ರ ಸಮಾಜದಲ್ಲಿ ಲಿಂಗ ತಾರತಮ್ಯ ವನ್ನು ಹೋಗಲಾಡಿಸಬಹುದು. ಹೆಣ್ಣು ಮಕ್ಕಳನ್ನು ಭ್ರೂಣಾವಸ್ಥೆಯಿಂದಲೇ ರಕ್ಷಿಸುವ ಕೆಲಸವಾಗಬೇಕು. ಆಗ ಮಾತ್ರ ಲಿಂಗಾನುಪಾತದಲ್ಲಿ ಸುಧಾರಣೆ ತರಲು ಸಾಧ್ಯ ಎಂದರು.
ಮಹಾತ್ಮಾ ಗಾಂಧೀಜಿ ಯವರ ಪರಿಕಲ್ಪನೆಯಂತೆ ದೇಶ ಅಭಿವೃದ್ಧಿ ಹೊಂದಿದೆ ಎಂದರೆ, ಹೆಣ್ಣು ಮಗಳು ನಿರ್ಭೀತಿಯಿಂದ ಮಧ್ಯರಾತ್ರಿ ಹೊರಗಡೆ ಸಂಚರಿಸಿ, ಮರಳಿ ಸುರಕ್ಷಿತವಾಗಿ ಮನೆಗೆ ಬಂದಾಗ ಮಾತ್ರ ಅಭಿವೃದ್ಧಿ ಹೊಂದಿದೆ ಎಂದರ್ಥ ಎಂದಿದ್ದರು. ಇಂತಹ ವಾತಾವರಣ ಕಲ್ಪಿಸಬೇಕಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರಾಜ್ಯದ ಇತರೆ ಜಿಲ್ಲೆಗೆ ಹೋಲಿಸಿದ್ದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯು ಮಾತೃಪ್ರಧಾನ ಕುಟುಂಬ ವ್ಯವಸ್ಥೆ ಹೊಂದಿರುವುದರಿಂದ ಲಿಂಗ ತಾರತಮ್ಯದಂತಹ ಪ್ರಕರಣಗಳು ಹೆಚ್ಚು ಕಂಡುಬರುತ್ತಿಲ್ಲ ಎಂದ ಅವರು, ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ಮಹಿಳೆಯರು ತಮ್ಮದೇ ಪ್ರಾಬಲ್ಯ ತೋರಿಸುತ್ತಿದ್ದಾರೆ. ಪುರುಷರಿಗಿಂತ ಹೆಣ್ಣು ಮಕ್ಕಳು ಯಾವ ಕ್ಷೇತ್ರದಲ್ಲಿಯೂ ಕಡಿಮೆಯಿಲ್ಲ ಎಂಬುವುದಕ್ಕೆ ಹಲವಾರು ನಿದರ್ಶನಗಳು ನಮ್ಮ ಕಣ್ಣ ಮುಂದೆ ಇಂದಿಗೂ ಇವೆ ಎಂದರು.
ಸಮಾಜದಲ್ಲಿ ಯಾವುದೇ ರೀತಿಯ ಹೆಣ್ಣು ಭ್ರೂಣ ಹತ್ಯೆ, ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಲಿಂಗ ತಾರತಮ್ಯ ಸೇರಿದಂತೆ ಮತ್ತಿತರ ದೌರ್ಜನ್ಯ ಪ್ರಕರಣಗಳನ್ನು ಸೂಕ್ಷö್ಮವಾಗಿ ನಿಭಾಯಿಸಿ, ಮಹಿಳೆಯರ ರಕ್ಷಣೆಗಾಗಿ ಇರುವ ಕಾನೂನುಗಳನ್ನು ಅನುಷ್ಠಾನ ಮಾಡುವಲ್ಲಿ ಇರುವ ಪ್ರಕ್ರಿಯೆಗಳ ಬಗ್ಗೆ ಅಧಿಕಾರಿಗಳು ಮಾಹಿತಿ ಹೊಂದಿರಬೇಕು. ಕೆಲಸದ ಸ್ಥಳಗಳಲ್ಲಿ, ಕೌಟುಂಬಿಕ ವಾತಾವರಣದಲ್ಲಿ ಮಹಿಳೆಯರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ತಮಗೆ ಅರಿವಿಲದಂತೆ ಲಿಂಗ ತಾರತಮ್ಯವನ್ನು ಅನುಭವಿಸುತ್ತಿದ್ದಾರೆ. ಸರ್ಕಾರಿ, ಖಾಸಗಿ ಸೇರಿದಂತೆ ಇತರೆ ವಲಯಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳೆಯರು, ಕೆಲಸದ ಸ್ಥಳಗಳಲ್ಲಿ ಲೈಂಗಿಕ ದೌಜ್ಯನ್ಯದಂತಹ ಪ್ರಕರಣಗಳನ್ನು ಎದುರಿಸಿದಾಗ ಆಂತರಿಕ ದೂರು ಸಮಿತಿಯಲ್ಲಿ ದೂರುಗಳನ್ನು ದಾಖಲಿಸಬಹುದಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಕುರಿತ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಎನ್ಫೋರ್ಸ್ಮೆಂಟ್ ಆಫೀಸರ್ ಡಾ. ರಾಮ್ರಾವ್ ಕೆ “ಪ್ರಸವಪೂರ್ವ ಲಿಂಗಪತ್ತೆ ಹಾಗೂ ಭ್ರೂಣ ಹತ್ಯೆ ನಿಷೇಧ ಕಾಯ್ದೆ ಕುರಿತು, ನ್ಯಾಯವಾದಿ ರಾಜೇಶ್ ಪಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಬಗ್ಗೆ, ಡಾ. ಜಿ.ಶಂಕರ್ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾದ್ಯಾಪಕಿ ಡಾ. ನಿಕೇತನ ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಮತ್ತು “Sಊe.ಃox Poಡಿಣಚಿಟ” ಬಗ್ಗೆ ಹಾಗೂ ಮಂಗಳೂರು ಸೈಂಟ್ ಅಲೋಶಿಯಸ್ ಕಾನೂನು ವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರಾಯನ್ ಫರ್ನಾಂಡೀಸ್ “ಜೀತ ಕಾರ್ಮಿಕ ಪದ್ಧತಿ (ರದ್ಧತಿ) ಕಾಯ್ದೆ -1976” ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶ್ಯಾಮ್ ಎಸ್ ಕಾದ್ರೋಳ್ಳಿ, ಉಡುಪಿ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಅನುರಾಧ ಬಿ ಹಾದಿಮನೆ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ದೀಪಾ ನಿರೂಪಿಸಿ, ಶಾರದ ವಂದಿಸಿದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions