ಉಡುಪಿ ಫೆಬ್ರವರಿ 24 (ಕ.ವಾ): ಜನ ಸಾಮಾನ್ಯರಿಗೆ ಆರೋಗ್ಯ ಶಿಕ್ಷಣದ ಬಗ್ಗೆ ಹೆಚ್ಚಿನ ಅರಿವು ಮೂಡಿಸುವುದರೊಂದಿಗೆ ಯಾವುದೇ ರೋಗ ಬಂದು ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮಾಡುವುದು ಸೂಕ್ತ. ಯಾವುದೇ ರೋಗ ಲಕ್ಷಣಗಳು ಕಂಡು ಬಂದ ಕೂಡಲೇ ವೈದ್ಯಕೀಯ ನೆರವು ಪಡೆಯುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಹೇಳಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅರೋಗ್ಯ ಇಲಾಖೆಯ ವಿವಿಧ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸರಕಾರ ಜನಸಾಮಾನ್ಯರಿಗೆ ಉತ್ತಮ ಅರೋಗ್ಯ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಇವುಗಳನ್ನು ಅಗತ್ಯವಿರುವವರಿಗೆ ಅವಶ್ಯಕತೆಗನುಗುಣವಾಗಿ ತಲುಪಿಸುವ ಕೆಲಸವಾಗಬೇಕು ಎಂದರು.
ಜಿಲ್ಲೆಯಲ್ಲಿ ಪ್ರತಿಯೊಬ್ಬ ಗರ್ಭಿಣಿ ಮಹಿಳೆಯರಿಗೆ ತಾಯಿಕಾರ್ಡ್ಗಳನ್ನು ನೀಡಬೇಕು. ಅವರುಗಳಿಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಕಾಲಕಾಲಕ್ಕೆ ನಿರಂತರ ವೈದ್ಯಕೀಯ ತಪಾಸಣೆ ನಡೆಸಬೇಕು. ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ನಿಮ್ಮ ಹಂತದಲ್ಲಿಯೇ ಸಭೆ ಕರೆದು ಗರ್ಭಿಣಿಯರಿಗೆ ಹಾಗೂ ನವಜಾತ ಶಿಶುಗಳಿಗೆ ಅಗತ್ಯ ಚಿಕಿತ್ಸೆ ನೀಡುವುದರ ಜೊತೆಗೆ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ತಿಳಿಸುವುದರೊಂದಿಗೆ ಜಿಲ್ಲೆಯಲ್ಲಿ ತಾಯಿ ಮರಣ ಸಂಖ್ಯೆಯನ್ನು ಶೂನ್ಯಕ್ಕಿಳಿಸಬೇಕು ಎಂದರು.
ಹೆರಿಗೆ ನಂತರವೂ ಸಹ ತಾಯಿ ಮತ್ತು ಮಕ್ಕಳಿಗೆ ಸೂಕ್ತ ಚಿಕಿತ್ಸೆಗಳ ಅವಶ್ಯಕತೆ ಇದ್ದಲ್ಲಿ ನೀಡಬೇಕು. ಒಂದೊಮ್ಮೆ ಇತರೆ ತಜ್ಞರ ಅವಶ್ಯಕತೆ ಇದ್ದಲ್ಲಿ ಅದನ್ನು ಸಹ ನೀಡುವಂತೆ ಶಿಫಾರಸು ಮಾಡಿ ಚಿಕಿತ್ಸೆ ಪಡೆಯುವಂತೆ ನೋಡಿಕೊಳ್ಳಬೇಕು ಎಂದ ಅವರು, ಪ್ರಸ್ತುತ ಕಾರ್ಕಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಉನ್ನತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಗರ್ಭಿಣಿ ಸಾಬೀಸ್ತಾ ಬಾನು ಎಂಬವರು ಚಿಕಿತ್ಸೆ ಫಲಿಸದೇ ಮೃತಪಟ್ಟ ಪ್ರಕರಣದ ಬಗ್ಗೆ ತನಿಖೆಗೆ ವೈದ್ಯಕೀಯ ಮಂಡಳಿಗೆ ಕಳಿಸಿಕೊಡುವಂತೆ ಸೂಚನೆ ನೀಡಿದರು.
ಮಕ್ಕಳಿಗೆ ನೀಡುವ ರೋಗ ನಿರೋಧಕ ಚುಚ್ಚು ಮದ್ದುಗಳನ್ನು ತಪ್ಪದೆ ನೀಡಬೇಕು, ಯಾವುದೇ ಒಂದು ಮಗವು ಸಹ ಲಸಿಕೆಯಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು. ಲಸಿಕಾ ಕಾರ್ಯಕ್ರಮದಲ್ಲಿ ಹೊರಗುಳಿದ ಮಕ್ಕಳಿಗೆ ಮರು ದಿನಾಂಕ ನಿಗದಿಪಡಿಸಿ ಲಸಿಕೆ ನೀಡಲು ಮುಂದಾಗಬೇಕು ಎಂದ ಅವರು, ಜಿಲ್ಲೆಯಲ್ಲಿ ಜಂತುಹುಳು ನಿವಾರಣಾ ಮಾತ್ರೆಗಳನ್ನು ಪ್ರತಿಶತಃ ನೂರರಷ್ಟು ವಿತರಣೆ ಮಾಡಲಾಗಿದೆ ಎಂದರು..
ತುರ್ತು ಆರೈಕೆ ಮತ್ತು ಚೇತರಿಕೆ ಕೇಂದ್ರಗಳಲ್ಲಿ ಮಾನಸಿಕ ಅಸ್ವಸ್ಥರು ತಮ್ಮ ಗುರುತು ಕಳೆದುಕೊಂಡು ರಸ್ತೆಯಲ್ಲಿ ಅಲೆದಾಡುತ್ತಿರುವುದು ಕಂಡು ಬಂದರೆ ಅವರುಗಳನ್ನು ಈ ಕೇಂದ್ರಕ್ಕೆ ಕರೆದು ತಂದು ಸೂಕ್ತ ಚಿಕಿತ್ಸೆ ನೀಡುವುದರ ಜೊತೆಗೆ ಅವರ ಪೋಷಕರಿಗೆ ತಲುಪಿಸುವ ಕಾರ್ಯವನ್ನು ಸೇವಾ ಮನೋಭಾವದಲ್ಲಿ ಕೈಗೊಳ್ಳಬೇಕು. ಇಲ್ಲಿನ ದೂರವಾಣಿ ಸಂಖ್ಯೆ 7795978883 ಬಗ್ಗೆ ಸಾರ್ವಜನಿಕರಿಗೆ ಪ್ರಚಾರ ಪಡಿಸಬೇಕು, ಸಾರ್ವಜನಿಕರು ಇಂಥಹ ವ್ಯಕ್ತಿಗಳು ಕಂಡು ಬಂದಲ್ಲಿ ಮೇಲ್ಕಂಡ ಸಂಖ್ಯೆಗೆ ಮಾಹಿತಿ ನೀಡಬೇಕು ಎಂದರು.
ಕ್ಷಯ ರೋಗಗಳ ಪರೀಕ್ಷೆಗಳನ್ನು ಹೆಚ್ಚು ಮಾಡುವುದರೊಂದಿಗೆ ರೋಗಿಗಳನ್ನು ತ್ವರಿತವಾಗಿ ಗುರುತಿಸುವುದರೊಂದಿಗೆ ಅವರುಗಳಿಗೆ ಸೂಕ್ತ ಚಿಕಿತ್ಸೆಯನ್ನು ನೀಡಿ ರೋಗದಿಂದ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದ ಅವರು, ಕ್ಷಯ ರೋಗದ ನಿರ್ಮೂಲನೆ ಹಾಗೂ ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸಿದ ಜಿಲ್ಲೆಯ ಗ್ರಾಮ ಪಂಚಾಯತ್ಗೆ ಪ್ರಸಕ್ತ ಸಾಲಿನಲ್ಲಿ 64 ಗ್ರಾಮ ಪಂಚಾಯತ್ಗಳು ಗೋಲ್ಡ್, ಸಿಲ್ವರ್ ಹಾಗೂ ಬ್ರೋನ್ಜ್ ಗೆ ಆಯ್ಕೆ ಆಗಿರುವುದಾಗಿ ತಿಳಿಸಿದರು.
ಜಿಲ್ಲೆಯ ರಕ್ತನಿಧಿ ಕೇಂದ್ರಗಳಲ್ಲಿ ಸರಕಾರ ನಿಗಧಿಪಡಿಸಿರುವ ಗುರಿಗಿಂತಲೂ ಹೆಚ್ಚು ಪಟ್ಟು ರಕ್ತದ ದಾಸ್ತಾನು ಇದೆ ಆದರೆ ಜಿಲ್ಲೆಗೆ ಹೊರ ಜಿಲ್ಲೆಗಳಿಂದ ಉನ್ನತ ಮಟ್ಟದ ವೈದ್ಯಕೀಯ ಸೇವೆಗಳನ್ನು ಪಡೆಯಲು ಬರುತ್ತಾರೆ. ಹಾಗಾಗಿ ಹೆಚ್ಚು ಹೆಚ್ಚು ರಕ್ತದಾನ ಶಿಬಿರಗಳನ್ನು ಏರ್ಪಡಿಸುವುದರೊಂದಿಗೆ ರಕ್ತ ಸಂಗ್ರಹಿಸಲು ಮುಂದಾಗಬೇಕು. ಬೈಂದೂರು, ಕುಂದಾಪುರ ಹಾಗೂ ಉಡುಪಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ರಕ್ತ ನಿಧಿ ಕೇಂದ್ರಗಳನ್ನು ಶೀಘ್ರದಲ್ಲಿ ಪ್ರಾರಂಭಿಸಲು ಮುಂದಾಗಬೇಕು ಎಂದರು.
ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ನಮ್ಮ ಕ್ಲಿನಿಕ್ ಗಳ ಮೂಲಭೂತ ಸೌಲಭ್ಯ ಕಲ್ಪಿಸಲು ನಗರ ಸ್ಥಳೀಯ ಸಂಸ್ಥೆಗಳಿಗೆ ಸರಕಾರದ ವತಿಯಿಂದ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದೆ. ಇವುಗಳ ಅಭಿವೃದ್ಧಿಗೆ ಮಾರ್ಗಸೂಚಿ ಅನ್ವಯ ನಿಯಮಾನುಸಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಪೌರಾಯುಕ್ತ ಮಹಾಂತೇಶ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಹುಬ್ಬಳ್ಳಿ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ. ನಾಗರತ್ನ, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕೆಎಂಸಿ ಆಸ್ಪತ್ರೆ ಪ್ರಸೂತಿ ತಜ್ಞೆ ಡಾ. ಶ್ಯಾಮಲಾ, ನವಜಾತಾ ಶಿಶು ತಜ್ಞೆ ಡಾ. ಲೆಸ್ಲಿ ಲೂಯಿಸ್, ತಜ್ಞ ವೈದ್ಯ ಡಾ. ಮುಖ್ಯಪ್ರಾಣ, ವಿವಿಧ ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions