ಸರಕಾರ ಮೀನುಗಾರರ ಅಭಿವೃದ್ಧಿಗೆ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಜಿಲ್ಲೆಯಲ್ಲಿ ಹೆಚ್ಚು ಫಲಾನುಭವಿಗಳು ಇರುವ ಹಿನ್ನೆಲೆ, ಹೆಚ್ಚುವರಿ ಅನುದಾನಕ್ಕೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.
ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪ್ರಧಾನ ಮಂತ್ರಿ ಮತ್ಸö್ಯ ಸಂಪದ ಯೋಜನೆಯ ಜಿಲ್ಲಾ ಮಟ್ಟದ ಆಯ್ಕೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಮಲ್ಪೆಯು ಸರ್ವಋತು ಬಂದರಾಗಿದ್ದು, ಜಿಲ್ಲೆಯಲ್ಲಿ ಎರಡು ಲಕ್ಷಕ್ಕೂ ಅಧಿಕ ಮೀನುಗಾರರು ಮೀನುಗಾರಿಕೆ ಹಾಗೂ ಪೂರಕ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಅವರುಗಳಿಗೆ ಸರಕಾರದಿಂದ ವಿವಿಧ ಯೋಜನೆಯಡಿ ನೀಡಲಾಗುವ ಆರ್ಥಿಕ ಸೌಲಭ್ಯ, ಸಹಾಯಧನಗಳ ಕುರಿತ ಮಾಹಿತಿಯನ್ನು ತಲುಪಿಸುವುದರೊಂದಿಗೆ ಯೋಜನೆಯ ಫಲಾನುಭವಿಗಳನ್ನಾಗಿ, ಸ್ವಾವಲಂಭಿ ಜೀವನ ನಡೆಸಲು ಅನುವು ಮಾಡಿಕೊಡಬೇಕು. ಪ್ರಸ್ತುತ ನಿಗಧಿಪಡಿಸಿರುವ ಸೌಲಭ್ಯಗಳು ಹೆಚ್ಚಿನ ಜನರಿಗೆ ತಲುಪಿಸಲು ಆಗುತ್ತಿಲ್ಲ. ಈ ಹಿನ್ನೆಲೆ, ಸರಕಾರಕ್ಕೆ ಹೆಚ್ಚುವರಿ ಅನುದಾನ ಹಾಗೂ ಗುರಿ ನೀಡಲು ಪ್ರಸ್ತಾವನೆ ಸಲ್ಲಿಸಬೇಕಿದೆ ಎಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ 5598 ಮೋಟಾರೀಕೃತ ನಾಡದೋಣಿಗಳು, 2017 ಯಾಂತ್ರೀಕೃತ ಮೀನುಗಾರಿಕಾ ದೋಣಿಗಳು ಹಾಗೂ 447 ಸಾಂಪ್ರದಾಯಿಕ ನಾಡದೋಣಿಗಳು ಕಾರ್ಯಾಚರಿಸುತ್ತಿವೆ ಎಂದ ಅವರು, ಕಳೆದ ಸಾಲಿನಲ್ಲಿ ಪಿ.ಎಂ.ಎಂ.ಎಸ್.ವೈ ಯೋಜನೆಯಡಿ ಪಚ್ಚಿಲೆ ಕೃಷಿ ಮಸೆಲ್ಸ್, ಕಲ್ಲ, ಕ್ಲಾಮ್ಸ್, ಮುತ್ತು ಇತ್ಯಾದಿ ಕಾರ್ಯಕ್ರಮಗಳ ಪ್ರತಿಶತಃ ನೂರರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಘಟಕಗಳ ಸ್ಥಾಪನೆಗೆ ಜಿಲ್ಲೆಯ 6 ಫಲಾನುಭವಿಗಳಿಗೆ ಸುಮಾರು 200 ಲಕ್ಷ ರೂ. ಸಹಾಯಧನ ಸೌಲಭ್ಯ ಒದಗಿಸಲಾಗಿದೆ ಎಂದ ಅವರು, ಕಳೆದ ಸಾಲಿನಲ್ಲಿ ಸಾಂಪ್ರದಾಯಿಕ ಮೀನುಗಾರರಿಗೆ ಆಳ ಸಮುದ್ರ ಮೀನುಗಾರಿಕಾ ಯಾಂತ್ರೀಕೃತ ದೋಣಿ ನಿರ್ಮಿಸಲು ಸಹಾಯ ಯೋಜನೆಯಡಿ ಜಿಲ್ಲೆಗೆ ಸಾಮಾನ್ಯ ವರ್ಗದಡಿ 8 ಗುರಿ ನಿಗಧಿಪಡಿಸಿದ್ದು, 9 ಅರ್ಜಿಗಳು ಸಲ್ಲಿಕೆಯಾಗಿವೆ. ಲಾಟರಿ ಮೂಲಕ ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಬೇಕು ಎಂದರು.
ಸಭೆಯಲ್ಲಿ ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕ ಕುಮಾರಸ್ವಾಮಿ ಬಿ.ವಿ, ಲೀಡ್ ಬ್ಯಾಂಕ್ ಮ್ಯಾನೆಜರ್ ಹರೀಶ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್, ಆಯ್ಕೆ ಸಮಿತಿಯ ಸದಸ್ಯರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
ನಮ್ಮ ವಾರ್ತಾಪತ್ರಿಕೆಗೆ ಚಂದಾದಾರರಾಗಿ ನವೀನ ಮಾಹಿತಿಗಳನ್ನು ಪಡೆಯಿರಿ
ನಾವು ನಿಮ್ಮ ಇಮೇಲ್ ವಿಳಾಸವನ್ನು ಇತರರೊಂದಿಗೆ ಹಂಚಿಕೊಳ್ಳುವುದಿಲ್ಲEditor Kannada Express 1st Floor, Raaj Towers Udupi - 576101
+919008424891
Kannadaexpress@gmail.com
© 2025 KannadaExpress. All Rights Reserved.
Design by GreyCrust Solutions